07/03/2026

Law Guide Kannada

Online Guide

ರಾಜ್ಯ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ಖಾಲಿ ಇರುವ 61 ಹುದ್ದೆಗಳ ಭರ್ತಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಖಾಲಿ ಇರುವ 61 ಹುದ್ದೆಗಳನ್ನು ಭರ್ತಿ ಮಾಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.

ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರು ಮತ್ತು ಜಿಲ್ಲಾ ಆಯೋಗಗಳಲ್ಲಿನ ಅಧ್ಯಕ್ಷರು ಮತ್ತು ಸದಸ್ಯರೂ ಸೇರಿ ಖಾಲಿ ಇರುವ 61 ಹುದ್ದೆಗಳನ್ನು ಭರ್ತಿ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ನಡೆಸಿದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾ. ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಅರ್ಜಿ ಪರಿಶೀಲಿಸಿದ ನಾಲ್ಕು ವಾರಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಇರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಅದು ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ 2025ರ ಮೇ 21ರಂದು ತತ್ಸಂಬಂಧಿ ಆದೇಶ ಹೊರಡಿಸಿದ್ದು, ಪ್ರತ್ಯೇಕ ಆದೇಶ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ವಿವಿಧ ಜಿಲ್ಲಾ ಆಯೋಗಗಳಲ್ಲಿ 18 ಅಧ್ಯಕ್ಷರ ಹುದ್ದೆಗಳು, 35 ಸದಸ್ಯರ ಹುದ್ದೆಗಳು ಖಾಲಿ ಇವೆ. ಅರ್ಜಿದಾರರ ಮನವಿಯ ಬಳಿಕ 9 ತಿಂಗಳ ಹಿಂದೆ ಆಯೋಗದ ಅಧ್ಯಕ್ಷರ ನೇಮಕವಾಗಿದೆ. ಉಳಿದಂತೆ 61 ಹುದ್ದೆಗಳು ಖಾಲಿ ಇವೆ. ಆಯೋಗದಲ್ಲಿ ವ್ಯಾಜ್ಯಗಳ ವಿಚಾರಣೆ ನಡೆಯುತ್ತಿಲ್ಲ. ಸುಮಾರು 10 ಸಾವಿರಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದೆ ಎನ್ನಲಾಗಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.