ಸೇವಾ ವಿಷಯದಲ್ಲಿ ಮಧ್ಯ ಪ್ರವೇಶವೇಕೆ? ವಿವರಣೆ ನೀಡಿ- ಎಸ್ಸಿ ಎಸ್ಟಿ ಆಯೋಗಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಸೇವಾ ವಿಷಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ಮಧ್ಯಪ್ರವೇಶ ಮಾಡಿರುವುದು ಏಕೆ ? ಅಫಿಡವಿಟ್ ಮೂಲಕ ನ್ಯಾಯಾಲಯಕ್ಕೆ ವಿವರಣೆ ನೀಡಿ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ಆದೇಶ ಪ್ರಶ್ನಿಸಿ ಧಾರವಾಡ-ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ದಾಮುಲ್) ಪರ ಅದರ ವ್ಯವಸ್ಥಾಪಕ ನಿರ್ದೇಶಕ ದೇವಪ್ಪ ಕಳಸದ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಯಿದೆಯಡಿ ಅವಕಾಶ ಮತ್ತು ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ಸೇವಾ ವಿಷಯದಲ್ಲಿ ಮಧ್ಯ ಪ್ರವೇಶ ಮಾಡಿದ್ದೇಕೆ ಎಂಬ ವಿವರಣೆ ನೀಡಿ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಆಯೋಗದ ಸದಸ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿತು.
ದಾಮುಲ್ ನ ಮಾರುಕಟ್ಟೆ ಅಧಿಕಾರಿ ಸುರೇಶ್ ಡಿ. ಕೆಂಗಾರ್ ಅವರನ್ನು ಪೂರ್ವಾನ್ವಯ ಬಡ್ತಿ ನೀಡುವಂತೆ ಆಯೋಗ ಆದೇಶ ಮಾಡಿತ್ತು. ಅರ್ಜಿ ಪರಿಶೀಲಿಸಿದ ನ್ಯಾಯಪೀಠ, ದಾಮುಲ್ ಮಾರುಕಟ್ಟೆ ಅಧಿಕಾರಿ ಸುರೇಶ್ ಡಿ. ಕೆಂಗಾರ್ ಅವರಿಗೆ ಪೂನಾರ್ವನ್ವಯ ಬಡ್ತಿ ನೀಡುವಂತೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ 2026ರ ಜುಲೈ 3ರಂದು ಹೊರಡಿಸಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಯಿದೆಯಲ್ಲಿ ಅವಕಾಶ ಇಲ್ಲದಿರುವಾಗ ಸೇವಾ ವಿಷಯಗಳಲ್ಲಿ ಮಧ್ಯ ಪ್ರವೇಶಿಸಿದ್ದು ಯಾವ ಅಧಿಕಾರದಡಿ ಎಂಬ ಬಗ್ಗೆ ವಿವರಣೆ ನೀಡಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಆಯೋಗದ ಕಾರ್ಯದರ್ಶಿಗೆ ನಿರ್ದೇಶನ ನೀಡಿತು. ಜತೆಗೆ, ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠವು ಸೆಪ್ಟೆಂಬರ್ 21ಕ್ಕೆ ವಿಚಾರಣೆ ಮುಂದೂಡಿದೆ.
ಎಚ್ ಎನ್ ವೆಂಕಟೇಶ್
ಗೌರವ ಸಂಪಾದಕರು
ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಮೈಸೂರು
