07/03/2026

Law Guide Kannada

Online Guide

ಠಾಣೆ ವ್ಯಾಪ್ತಿಗೆ ಒಳಪಡಲ್ಲ ಎಂದು ನಾಪತ್ತೆ ದೂರು ಸ್ವೀಕಾರ ನಿರಾಕರಿಸುವಂತಿಲ್ಲ-ಗೈಡ್ ಲೈನ್ ರಿಲೀಸ್ ಮಾಡಿದ ಹೈಕೋರ್ಟ್

ಬೆಂಗಳೂರು: ನಾಪತ್ತೆಯಾಗಿರುವ ವ್ಯಕ್ತಿಗಳ ಬಗ್ಗೆ ದೂರುಗಳನ್ನು ಪ್ರಾಮಾಣಿಕವಾಗಿ ದಾಖಲು ಮಾಡಿಕೊಳ್ಳಬೇಕು. ನಾಪತ್ತೆಯಾದವರ ಬಗ್ಗೆ ದೂರು ಸ್ವೀಕರಿಸುವಾಗ ಪೊಲೀಸರು ಸಂಬಂಧಿಸಿದ ಪ್ರದೇಶ ನಮ್ಮ ಠಾಣೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ನಿರಾಕರಣೆ ಮಾಡುವಂತಿಲ್ಲ ಎಂದು ಹೈಕೋರ್ಟ್ ಖಡಕ್ ಆದೇಶ ನೀಡಿದೆ.

ಹುಬ್ಬಳಿಯ ರಾಮಕೃಷ್ಣ ಭಟ್ ಎಂಬುವವರು ‘ನನ್ನ ಪುತ್ರಿ 2023ರಲ್ಲಿ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ (ಧಾರವಾಡ), ಇಂತಹ ದೂರುಗಳು ಬಂದಾಗ ಪೊಲೀಸರು ಯಾವ ಕ್ರಮ ಅನುಸರಿಸಬೇಕು ಎಂಬ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

‘ತಂತ್ರಜ್ಞಾನ ಬದಲಾಗುತ್ತಿರುವ ಇಂದಿನ ದಿನಗಳಲ್ಲಿ ನಾಪತ್ತೆ ಅಥವಾ ಕಣ್ಮರೆಯಾಗುತ್ತಿರುವ ವ್ಯಕ್ತಿಗಳ ಕುರಿತ ದೂರುಗಳ ಸ್ವೀಕಾರ-ಪರಿಹಾರಕ್ಕೆ ಮಾರ್ಗಸೂಚಿಗಳೂ ಬದಲಾಗುವ ಅಗತ್ಯವಿದೆ. ಈ ಕುರಿತಂತೆ ಕೇಂದ್ರ ಸರ್ಕಾರ 2009ರಲ್ಲಿ ಹೊರಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಮತ್ತು 2016ರಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹೊರಡಿಸಿರುವ ಎಸ್ಒಪಿ ಆಧರಿಸಿ ರಾಜ್ಯ ಸರ್ಕಾರ ಅಗತ್ಯ ಸುತ್ತೋಲೆ ಅಥವಾ ಅಧಿಸೂಚನೆ ಹೊರಡಿಸಬೇಕು’ ಎಂದು ಹೈಕೋರ್ಟ್ ನ್ಯಾಯಪೀಠ ನಿರ್ದೇಶಿಸಿದೆ.

ಪ್ರಸಕ್ತ ಪ್ರಕರಣದಲ್ಲಿ ಪೊಲೀಸರು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ನ್ಯಾಯಪೀಠ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿಕೆ ಮಾಡಿದೆ.

ಹೈಕೋರ್ಟ್ ನೀಡಿರುವ ಗೈಡ್ ಲೈನ್ಸ್ ಹೀಗಿದೆ ನೋಡಿ…
ಪ್ರಕರಣ ನಮ್ಮ ಠಾಣಾ ವ್ಯಾಪ್ತಿಗೆ ಸೇರುವುದಿಲ್ಲ ಎನ್ನದೆ ನಾಪತ್ತೆಯಾಗಿರುವ ವ್ಯಕ್ತಿಗಳ ಬಗ್ಗೆ ದೂರುಗಳನ್ನು ಪ್ರಾಮಾಣಿಕವಾಗಿ ದಾಖಲು ಮಾಡಿಕೊಳ್ಳಬೇಕು. ಯಾವುದೇ ಸಂದರ್ಭದಲ್ಲಿಯೂ ಯಾವುದೇ ಪೊಲೀಸ್ ಅಧಿಕಾರಿಯು ಇಂತಹ ಯಾವುದೇ ದೂರನ್ನು ತಿರಸ್ಕರಿಸಬಾರದು ಮತ್ತು ಪ್ರತಿಯೊಂದು ದೂರನ್ನು ತಕ್ಷಣವೇ ಪರಿಗಣಿಸಬೇಕು.

ನಾಪತ್ತೆಯಾದವರ ಮೃತದೇಹ ನಂತರದಲ್ಲಿ ಪತ್ತೆಯಾದರೆ, ತನಿಖಾ ಅಧಿಕಾರಿಗಳು ಡಿಎನ್ಎ ವಿಶ್ಲೇಷಣೆ ಮೂಲಕ ಹೋಲಿಕೆ ಮಾಡಲು ಸಾಧ್ಯವಾಗುವಂತೆ ಕಾಣೆಯಾದ ವ್ಯಕ್ತಿಯ ಕುಟುಂಬದ ಸದಸ್ಯರ ಫೋರೆನ್ಸಿಕ್ ಪುರಾವೆಗಳನ್ನು ಪಡೆದುಕೊಳ್ಳಬೇಕು.

ಸಂಬಂಧಿಸಿದ ಶಾಸನಬದ್ದ ಪ್ರಾಧಿಕಾರಗಳು ಕಾಣೆಯಾದ ಮಹಿಳೆ, ಅಪ್ರಾಪ್ತ ವಯಸ್ಕರಿಗೆ ಸಂಬಂಧಿಸಿದೆಯೇ ಅಥವಾ ಯಾವುದೇ ಇತರ ವ್ಯಕ್ತಿಗೆ ಸಂಬಂಧಿಸಿದೆಯೇ ಎಂಬುದನ್ನು ನಿರ್ದಿಷ್ಟವಾಗಿ ಗಮನಿಸಿದ ನಂತರ ಮಾನವ ಕಳ್ಳ ಸಾಗಣೆ ಘಟಕ ಅಥವಾ ಕೋಶಕ್ಕೆ ಮಾಹಿತಿ ನೀಡಬೇಕು.

ಕಾಣೆಯಾದ ವ್ಯಕ್ತಿಯ ಇತ್ತೀಚಿನ ಛಾಯಾಚಿತ್ರ ಸಂಗ್ರಹಿಸಿ ಅದರ ಪ್ರತಿಗಳನ್ನು ಎಯುಟಿಎಚ್ಯು, ಸಿಐಡಿ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋಗಳಿಗೂ ಒದಗಿಸಬೇಕು.

ಕಾಣೆಯಾದವರ ದೂರಿನ ವಿವರಗಳನ್ನು ದೂರು ದಾಖಲಾದ 24 ಗಂಟೆಗಳ ಒಳಗೆ ಬೀಟ್ ಪೊಲೀಸ್ ಸಿಬ್ಬಂದಿ ಮತ್ತು ಹೊಯ್ಸಳ ಮುಂತಾದ ಮೊಬೈಲ್ ಪೊಲೀಸ್ ಘಟಕಗಳಿಗೆ ಡಿಜಿಟಲ್ ರೂಪದಲ್ಲಿ ರವಾನಿಸಬೇಕು.

ಕಾಣೆಯಾದವರ ದೂರಿನ ವಿವರಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಪೋರ್ಟಲ್ಗಳಲ್ಲಿ ಹಾಗೂ ಇತರ ಪೋರ್ಟಲ್ಗಳಲ್ಲಿಯೂ ಅಪ್ಲೋಡ್ ಮಾಡಬೇಕು.

ಕಾಣೆಯಾದವರ ವಿವರಗಳನ್ನು (ಆ ನಿಟ್ಟಿನಲ್ಲಿ ಅಗತ್ಯ ಒಪ್ಪಿಗೆ ಪಡೆದ ನಂತರ) ಮಾನ್ಯತೆ ಪಡೆದ ದಿನಪತ್ರಿಕೆಗಳು, ನಿಯತಕಾಲಿಕಗಳಲ್ಲಿ ಹಾಗೂ ಅಡಿಯೊ ಮತ್ತು ವಿಡಿಯೊ ಸುದ್ದಿ ಜಾಲತಾಣಗಳ ಮೂಲಕ ಪ್ರಕಟಿಸಬೇಕು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.