07/03/2026

Law Guide Kannada

Online Guide

ಅನುಕಂಪದ ಆಧಾರದ ನೌಕರಿ ಅರ್ಜಿ 3 ತಿಂಗಳಲ್ಲಿ ವಿಲೇವಾರಿ ಮಾಡದಿದ್ರೆ ನೀವೇ ಪರಿಹಾರ ನೀಡಿ- ಹೈಕೋರ್ಟ್ ತಾಕೀತು

ಬೆಂಗಳೂರು: ಅನುಕಂಪದ ಆಧಾರದಲ್ಲಿ ನೌಕರಿ ಕೋರಿ ಸಲ್ಲಿಸುವ ಅರ್ಜಿಯನ್ನ 3 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಇಲ್ಲದಿದ್ದರೇ ಸರಕಾರದ ಪ್ರಾಧಿಕಾರಗಳೇ ಬಾಧಿತರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ತಾಕೀತು ಮಾಡಿದೆ.

ಅನುಕಂಪದ ಆಧಾರದಲ್ಲಿ ನೌಕರಿಯನ್ನು ಕೋರಿ ಸಲ್ಲಿಸುವ ಅರ್ಜಿ ವಿಲೇವಾರಿಗೆ ಅನಗತ್ಯ ವಿಳಂಬ ಮಾಡಿದರೇ ಸಕ್ಷಮ ಪ್ರಾಧಿಕಾರವೇ ಬಾಧಿತರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ಅನುಕಂಪದ ಆಧಾರದ ಅರ್ಜಿ ವಿಲೇವಾರಿಗೆ ಅನಗತ್ಯ ವಿಳಂಬ ಮಾಡುವ ಧೋರಣೆಗೆ ಹೈಕೋರ್ಟ್ ಕಡಿವಾಣ ಹಾಕಿದೆ. ನಿಯಮ ಪ್ರಕಾರ ಮೂರು ತಿಂಗಳಲ್ಲಿ ಅರ್ಜಿ ವಿಲೇವಾರಿ ಮಾಡಬೇಕು. ಈ ಅರ್ಜಿಯನ್ನು ಸಕ್ರಮ ಪ್ರಾಧಿಕಾರ ವಿಲೇವಾರಿ ಮಾಡದಿದ್ದರೆ ಆಗ ಆ ಸಕ್ಷಮ ಪ್ರಾಧಿಕಾರವೇ ಬಾಧಿತರಿಗೆ ಪರಿಹಾರ ನೀಡಬೇಕು ಎಂದು ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠ ತೀರ್ಪು ನೀಡಿದೆ.

”ಹೃತಿಕ್ ಎಂ ಗಿ’s ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ಮೈಸೂರು” ಪ್ರಕರಣದಲ್ಲಿ ಈ ತೀರ್ಪು ನೀಡಿದ್ದು, ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಮೂರು ತಿಂಗಳಲ್ಲಿ ಪರಿಗಣಿಸದೆ ಹೋದರೆ ಸಕ್ರಮ ಪ್ರಾಧಿಕಾರವು ಅರ್ಜಿದಾರರಿಗೆ ಪರಿಹಾರ ರೂಪದಲ್ಲಿ ವೇತನ ಪಾವತಿಸುವ ಹೊಣೆ ಬರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಅನುಕಂಪದ ಉದ್ಯೋಗಕ್ಕೆ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಲ್ಲಿ ಸರಕಾರದ ಪ್ರಾಧಿಕಾರಗಳು ಅನಗತ್ಯ ವಿಳಂಬ ಮಾಡುತ್ತಿದೆ. ಈ ವಿಳಂಬವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಪ್ರಕರಣಗಳು ಹೈಕೋರ್ಟ್ನಲ್ಲಿ ಇತ್ಯರ್ಥಕ್ಕೆ ಬಾಕಿ ಉಳಿದಿವೆ. ಈ ರೀತಿ ತಿಂಗಳುಗಟ್ಟಲೆ ಅಥವಾ ವರ್ಷಗಟ್ಟಲೆ ಅರ್ಜಿಗಳನ್ನು ಪರಿಗಣಿಸದೆ ಬಾಕಿ ಉಳಿಸಿಕೊಂಡರೆ ಅನುಕಂಪ ಉದ್ಯೋಗ ಒದಗಿಸಲು ರಾಜ್ಯ ಸರಕಾರ ರೂಪಿಸಿರುವ ಕರ್ನಾಟಕ ನಾಗರಿಕ ಸೇವೆಗಳ (ಅನುಕಂಪದ ಆಧರಿತ ಉದ್ಯೋಗ) ನಿಯಮಗಳು 1996 ಇದರ ಮೂಲ ಉದ್ದೇಶವೇ ನಾಶವಾದಂತಾಗುತ್ತದೆ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿದೆ.

ಪ್ರಕರಣದ ವಿವರ..
ಮೈಸೂರಿನ ಕುವೆಂಪು ನಗರದಲ್ಲಿ ಹೈಸ್ಕೂಲ್ ಒಂದರಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಕೆ ನಿಂಗರಾಜು ಅವರು ಸೆಪ್ಟೆಂಬರ್ 11 2018ರಲ್ಲಿ ಮೃತಪಟ್ಟಿದ್ದರು. ಅವರ ನಿಧನದ ಬಳಿಕ ಮೊದಲನೇ ಅರ್ಜಿದಾರರು ಅನುಕಂಪದ ಆಧಾರದ ನೌಕರಿ ಕೋರಿ ಅರ್ಜಿ ಸಲ್ಲಿಸಿದರು. ಈ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅರ್ಜಿದಾರರು, ಶಿಕ್ಷಣ ಇಲಾಖೆಯ ಹಿಂಬರಹವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೊರೆ ಹೋದರು. ಹೈಕೋರ್ಟ್ ನ್ಯಾಯಪೀಠವು ಅರ್ಜಿದಾರರ ಅರ್ಜಿಯನ್ನು ಪುರಸ್ಕರಿಸಿ ಅನುಕಂಪದ ಆಧಾರದಲ್ಲಿ ಉದ್ಯೋಗ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಎಂಟು ವಾರಗಳಲ್ಲಿ ಕಾನೂನು ರೀತ್ಯಾ ಬಗೆಹರಿಸುವಂತೆ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿತು.

ಆದರೆ, ಸಕ್ಷಮ ಪ್ರಾಧಿಕಾರವು ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಣ ಸಂಸ್ಥೆಗಳ ತಿದ್ದುಪಡಿ ನಿಯಮ 2017 ರ ಪ್ರಕಾರ ಉದ್ಯೋಗ ನೀಡಲು ಅಸಾಧ್ಯ ಎಂಬುದಾಗಿ ಹಿಂಬರಹ ನೀಡಿತ್ತು. ಈ ಹಿಂಬರಹದಿಂದ ಬಾಧಿತರಾದ ಅರ್ಜಿದಾರರು ಮತ್ತೆ ಹೈಕೋರ್ಟ್ ನ್ಯಾಯ ಪೀಠದ ಮೆಟ್ಟಿಲೇರಿದ್ದರು. ಅರ್ಜಿದಾರರ ತಂದೆ ಮೃತಪಟ್ಟ ಹಲವು ವರ್ಷಗಳ ಬಳಿಕ ಜಾರಿಗೆ ಬಂದ ನಿಯಮಗಳ ಆಧಾರದಲ್ಲಿ ತಮ್ಮ ಅನುಕಂಪ ಆಧಾರಿತ ನಿಯುಕ್ತಿಯನ್ನು ನಿರಾಕರಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದರು.

ಈ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ, ಅನುಕಂಪ ಆಧಾರಿತ ಉದ್ಯೋಗಕ್ಕಾಗಿ ಮೃತಪಟ್ಟ ಒಂದು ವರ್ಷದ ಒಳಗೆ ಅರ್ಜಿದಾರರು ಅರ್ಜಿ ಸಲ್ಲಿಸಿರಬೇಕು ಮತ್ತು ಈ ಅರ್ಜಿ ಸ್ವೀಕರಿಸಿದ ಮೂರು ತಿಂಗಳಲ್ಲಿ ಅದನ್ನು ವಿಲೇವಾರಿ ಮಾಡಬೇಕು ಎಂದು ತಿಳಿಸಿತು. ಒಂದು ವೇಳೆ ಅರ್ಜಿಯನ್ನು ಇತ್ಯರ್ಥಗೊಳಿಸಲು ಸಾಧ್ಯವಾಗದಿದ್ದರೆ ಸಕ್ರಮ ಪ್ರಾಧಿಕಾರವು ಅದಕ್ಕೆ ಸಂಬಂಧಪಟ್ಟ ನಷ್ಟವನ್ನು ಬರಿಸಲು ಸಿದ್ಧರಿರಬೇಕು. ಅರ್ಜಿದಾರರಿಗೆ ಕಾನೂನು ರೀತಿಯ ಸಿಗಬೇಕಾದ ವೇತನವನ್ನು ಪರಿಹಾರವಾಗಿ ಕೊಡಬೇಕು ಎಂದು ಹೇಳಿತು.

ಕುಟುಂಬದ ಏಕೈಕ ಆಸರೆಯಾಗಿರುವ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಾಗ ಆ ಕುಟುಂಬ ಆಘಾತದ ಜೊತೆಗೆ ಆರ್ಥಿಕ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಆಗ ಕುಟುಂಬ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತದೆ. ಹೀಗಾಗಿ ನಿಯಮಾನುಸಾರವಾಗಿ, ಅನುಕಂಪದ ಆಧಾರಿತ ಉದ್ಯೋಗಕ್ಕಾಗಿ ಅರ್ಜಿದಾರರು ಸಲ್ಲಿಸಿದ ಅರ್ಜಿಗಳನ್ನು ಮೂರು ತಿಂಗಳಲ್ಲಿ ಪರಿಗಣಿಸಿ ವಿಲೇವಾರಿ ಮಾಡಬೇಕು. ಒಂದೊಮ್ಮೆ ಅರ್ಜಿದಾರ ಅನುಕಂಪದ ಉದ್ಯೋಗ ಪಡೆದಾಗ ಆತನ ಅರ್ಜಿ ಪರಿಗಣಿಸಲು ಮಾಡಿದ ಅನಗತ್ಯ ವಿಳಂಬಕ್ಕೆ ವೇತನ ಪಾವತಿಸಲು ಪ್ರಾಧಿಕಾರ ಹೊಣೆಯಾಗಿರುತ್ತದೆ ಎಂದು ಹೈಕೋರ್ಟ್ ನ್ಯಾಯಪೀಠ ತಿಳಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.