ಅನುದಾನಿತ ಸಂಸ್ಥೆ ನೌಕರರ ವಿರುದ್ದವೂ ‘ಲೋಕಾ’ ತನಿಖೆ: ಹೈಕೋರ್ಟ್ ಅಭಿಪ್ರಾಯವೇನು..?
ಬೆಂಗಳೂರು: ‘ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆ ಸಿಬ್ಬಂದಿಗಳೂ ಲೋಕಾಯುಕ್ತ ತನಿಖೆಯ ವ್ಯಾಪ್ತಿಗೆ ಬರುತ್ತಾರೆ. ಅವರ ವಿರುದ್ಧವೂ ಲೋಕಾಯುಕ್ತರು ತನಿಖೆ ನಡೆಸಬಹುದು’ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ನೆಲಮಂಗಲದ ಬೈರಶೆಟ್ಟಿಹಳ್ಳಿಯ ಶ್ರೀ ಬಾಲಾಂಜನೇಯ ಪ್ರೌಢಶಾಲೆ ಗ್ರಂಥಪಾಲಕ ಹಾಗೂ ಲಿಪಿಕ ಬಿ.ಲಕ್ಷ್ಮೀನಾರಾಯಣ ಎಂಬುವವರು ತಮ್ಮ ವಿರುದ್ಧದ ಲೋಕಾಯುಕ್ತ ವರದಿ ಆಧರಿಸಿ ಕೈಗೊಳ್ಳಲಾಗಿದ್ದ ತನಿಖೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಮೇಲ್ಮನವಿ ವಜಾಗೊಳಿಸಿರುವ ನ್ಯಾಯಮೂರ್ತಿ ಡಿ.ಕೆ.ಸಿಂಗ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಸರ್ಕಾರದಿಂದ ಅನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯನ್ನು ಕೆಲವು ಉದ್ದೇಶಗಳಿಗಾಗಿ ಸರ್ಕಾರಿ ಸಿಬ್ಬಂದಿಯ ಭಾಗವೆಂದೇ ಪರಿಗಣಿಸಿರುವ ಹೈಕೋರ್ಟ್ನ ಪೂರ್ವ ನಿದರ್ಶನಗಳಿವೆ. ಅವರ ವೇತನ, ಭತ್ಯೆ ಮತ್ತು ಸೇವಾ ಷರತ್ತುಗಳನ್ನು ಸರ್ಕಾರವೇ ನಿಯಂತ್ರಿಸುತ್ತದೆ. ಹೀಗಾಗಿ, ಅರ್ಜಿದಾರರ ವಿರುದ್ಧವೂ ಲೋಕಾಯುಕ್ತ ತನಿಖೆ ನಡೆಸಬಹುದು’ ಎಂದು ಸ್ಪಷ್ಟಪಡಿಸಿದೆ.
‘ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 12(3)ರಡಿ ನೀಡಿರುವ ವರದಿ ಮತ್ತು ಸಿಸಿಎ ನಿಯಮ 14ಎ ಅಡಿ ತನಿಖೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶಗಳು ಸರಿ ಇದೆ’ ಎಂದು ನ್ಯಾಯಪೀಠ ತಿಳಿಸಿದೆ.
2004 ಮತ್ತು 2005ರಲ್ಲಿ ಬಿ.ಲಕ್ಷ್ಮೀನಾರಾಯಣ ಇತರ ನಾಲ್ವರು’ಶಾಲಾ ಆಡಳಿತ ಮಂಡಳಿಯಿಂದ ಅಗತ್ಯ ಅನುಮತಿ ಪಡೆಯದೆ ವಾಜರಹಳ್ಳಿ ಹಾಗೂ ನೆಲಮಂಗಲ ವ್ಯಾಪ್ತಿಯಲ್ಲಿ ಜಮೀನು ಖರೀದಿ ಮಾಡಿದ್ದಾರೆ’ ಎಂದು ಆರೋಪಿಸಿ 2013ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಲಾಗಿತ್ತು. ‘ಲಕ್ಷ್ಮೀನಾರಾಯಣ ಅವರು ನಿಯಮಾನುಸಾರ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ’ ಎಂದು ದೂರುದಾರರು ಆರೋಪಿಸಿದ್ದರು. ಲೋಕಾಯುಕ್ತವು ಪ್ರಾಥಮಿಕ ತನಿಖೆ ನಡೆಸಿ ಸರ್ಕಾರಕ್ಕೆ ಸಲ್ಲಿಸಿದ್ದ ವರದಿ ಆಧರಿಸಿ ಸರ್ಕಾರ ಸಿಸಿಎ ನಿಯಮಗಳಡಿ ಪೂರ್ಣ ಪ್ರಮಾಣದ ತನಿಖೆ ನಡೆಸಲು ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಿತ್ತು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
