30/06/2026

Law Guide Kannada

Online Guide

ಅಧಿಕಾರಿಗಳ ಬಳಿ ಲಂಚದ ಹಣ ಪತ್ತಯಾದ ಮಾತ್ರಕ್ಕೆ ಅಪರಾಧ ಸಾಬೀತಾಗಲ್ಲ: ಸಾಕ್ಷ್ಯ ಕಡ್ಡಾಯ – ಹೈಕೋರ್ಟ್

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕೆ ಮತ್ತು ಸ್ವೀಕರಿಸಿದ್ದಕ್ಕೆ ಸಾಕ್ಷ್ಯ ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ ಪ್ರಮುಖ ತೀರ್ಪನ್ನು ನೀಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಜಯಚಂದ್ರ ಎಂಬುವವರ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್. ರಾಚ ಅವರಿದ್ದ ಏಕಸದಸ್ಯ ಪೀಠವು, ಸರ್ಕಾರಿ ಅಧಿಕಾರಿಗಳ ಬಳಿ ಕೇವಲ ಲಂಚದ ಹಣ ಪತ್ತೆಯಾದ ತಕ್ಷಣವೇ ಅವರು ಅಪರಾಧಿ ಎಂದು ಸಾಬೀತಾಗುವುದಿಲ್ಲ. ಆರೋಪಿಯು ಲಂಚಕ್ಕಾಗಿ ನಿರ್ದಿಷ್ಟವಾಗಿ ಬೇಡಿಕೆ ಇಟ್ಟಿದ್ದ ಹಾಗೂ ಅದನ್ನು ಸ್ವೀಕರಿಸಿದ್ದ ಎನ್ನುವುದಕ್ಕೆ ತನಿಖಾ ಸಂಸ್ಥೆಗಳು ಕಡ್ಡಾಯವಾಗಿ ಬಲವಾದ ಸಾಕ್ಷ್ಯಗಳನ್ನು ಒದಗಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿತು.

ಲಂಚ ಸ್ವೀಕಾರ ಪ್ರಕರಣ ಸಂಬಂಧ ಈ ಹಿಂದೆ ಚಿಕ್ಕಬಳ್ಳಾಪುರದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜಯಚಂದ್ರ ಅವರಿಗೆ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ನ್ಯಾಯಪೀಠವು, ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ಏನಿದು ಆರೋಪ…
ರೈತರೊಬ್ಬರಿಗೆ ಕೃಷಿಕರೆಂಬ ಪ್ರಮಾಣಪತ್ರ ನೀಡುವ ಸಲುವಾಗಿ ಜಯಚಂದ್ರ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಆದರೆ ಲಂಚದ ಬೇಡಿಕೆ ಮತ್ತು ಸ್ವೀಕಾರವನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇದ್ದ ಕಾರಣ, ಕೇವಲ ಹಣ ಪತ್ತೆಯಾಗಿದೆ ಎಂಬ ಅಂಶವನ್ನು ಆಧರಿಸಿ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತೀರ್ಪು ನೀಡಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.